ಬೆಂಗಳೂರು:ಗಂಗಾ ಕಲ್ಯಾಣ ಯೋಜನೆಯಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳು ನೀಡುತ್ತಿರುವ ಘಟಕ ವೆಚ್ಚ ಹಾಗೂ ನೆರವಿನ ಮೊತ್ತದಲ್ಲಿ ವ್ಯತ್ಯಾಸಗಳಿದ್ದು, ಇಲಾಖೆಗೊಂದು ನೀತಿ ಅನುಸರಿಸುವುದು ಸೂಕ್ತವಲ್ಲ ಹಾಗಾಗಿ ಇನ್ನು ಮುಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ನೀಡುವ ನೆರವಿನ ಮೊತ್ತವನ್ನು ಸಮಾಜ ಕಲ್ಯಾಣ ಇಲಾಖೆಯಲ್ಲಿರುವಂತೆಯೇ ರೂ.3.5 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಅವರು ಇಂದು ವಿಧಾನ ಸೌಧದ ತಮ್ಮ ಕೊಠಡಿಯಲ್ಲಿ ನಡೆಸಿದ ವಿವಿಧ ನಿಗಮ / ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಉನ್ನತಾಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಇದುವರೆವಿಗೂ ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ಘಟಕಕ್ಕೆ ರೂ.2.00 ಲಕ್ಷ ನೆರವು ನೀಡಲಾಗುತ್ತಿತ್ತು. ಆದರೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ರೂ.3.5 ಲಕ್ಷ ರೂಪಾಯಿ ನೆರವು ನೀಡಲಾಗುತ್ತಿದೆ. ಒಂದೇ ಉದ್ದೇಶಕ್ಕಾಗಿ ನೀಡಲಾಗುವ ಈ ನೆರವಿನ ಮೊತ್ತದಲ್ಲಿ ಇಲಾಖೆಗೊಂದು ನೀತಿ ಅನುಸರಿಸುವುದು ಸೂಕ್ತವಲ್ಲವೆಂದು ಅವರು ಅಭಿಪ್ರಾಯಪಟ್ಟರು.

