ಕನಕಗಿರಿ :ತಾಲೂಕಿನ ಎಲ್ಲಾ ಗ್ರಾಮಗಳಲ್ಲಿಯೂ ಮೂಲಸೌಕರ್ಯಗಳನ್ನು ಕಲ್ಪಿಸಲು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಸೂಚಿಸಿದರು.
ತಾಲೂಕಿನ ಚಿಕ್ಕಮಾದಿನಾಳ ಗ್ರಾ.ಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಗ್ರಾಮಸ್ಥರಿಂದ ಗ್ರಾಮಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳ ಮನವಿಯನ್ನು ಸ್ವೀಕರಿಸಿ ಮಾತನಾಡಿದ ಸಚಿವರು, ಪ್ರತಿ ಗ್ರಾಮದಲ್ಲೂ ಶುದ್ಧ ಕುಡಿಯುವ ನೀರು, ವಿದ್ಯುತ್ ಸೌಲಭ್ಯ, ಬಸ್ ಸೌಕರ್ಯ ಒದಗಿಸಲು ಸಂಬಂದಿಸಿದ ಇಲಾಖೆಗಳಿಗೆ ತಿಳಿಸಿದರು.
ನಂತರ ಕೆಲ ಗ್ರಾಮಗಳಲ್ಲಿ ಕಲ್ಯಾಣ ಮಂಟಪದ ದುರಸ್ತಿ, ಹೈಮಾಸ್ಟ್ ದೀಪ, ಅಲೆಮಾರಿ ಜನಾಂಗಕ್ಕೆ ವಸತಿ ಯೋಜನೆ ಕಲ್ಪಿಸುವುದು, ಅಗಸಿ ಬಾಗಿಲು ನಿರ್ಮಾಣ, ಪಶು ಆಸ್ಪತ್ರೆ, ರಸ್ತೆ ದುರಸ್ತಿ, ಶಾಲಾ ಕಟ್ಟಡಗಳ ದುರಸ್ತಿ ಕಾರ್ಯ ಸೇರಿದಂತೆ ಹಲವು ಮೂಲಸೌಕರ್ಯಗಳಿಗೆ ಗ್ರಾಮಸ್ಥರು ಸಚಿವರಲ್ಲಿ ಮನವಿ ಮಾಡಿದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಸಚಿವರು, ಎಲ್ಲಾ ಮನವಿಗಳನ್ನು ಸ್ವೀಕರಿಸಿ, ಆದಷ್ಟು ಬೇಗಾ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸುವುದಾಗಿ ತಿಳಿಸಿದರು. ಇದೇ ವೇಳೆ ಬಂಕಾಪುರ ಗ್ರಾಮಸ್ಥರು ಗ್ರಾಮದಲ್ಲೇ ನ್ಯಾಯಬೆಲೆ ಅಂಗಡಿಯ ರೇಷನ್ ಅನ್ನು ಗ್ರಾಮದಲ್ಲೇ ವಿತರಣೆ ಮಾಡುವಂತೆ ಹಾಗೂ ಬ್ಯಾಂಕ್ ಸ್ಥಾಪನೆಗೆ ಒತ್ತಾಯಿಸಿದರು. ಗ್ರಾಮಸ್ಥರ ಮನವಿಗೆ ಸಚಿವರು ಕೂಡಲೇ ಅಧಿಕಾರಿಗಳಿಗೆ ತಿಳಿಸಿ, ಗ್ರಾಮದಲ್ಲಿ ಬ್ಯಾಂಕ್ ಸ್ಥಾಪನೆಗೆ ಹಾಗೂ ಪಡಿತರ ವಿತರಣೆಗೆ ಕ್ರಮವಹಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ವಿಶ್ವನಾಥ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಬಿ ಕಂದಕೂರ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿಗಳು, ಗ್ರಾಮಸ್ಥರು ಹಾಜರಿದ್ದರು.
