ಟಿಎಸ್‌ಆರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ

Loading

ಹೊಸಪೇಟೆ ವಿಜಯನಗರ ಜಿಲ್ಲೆ : ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರರಾವ್ (ಟಿಎಸ್‌ರ್) ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆ ಗುರುತಿಸಿ ನೀಡುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಕಟಿಸಿದೆ.


ಟಿಯೆಸ್ಸಾರ್ ಪತ್ರಿಕೋದ್ಯಮ ಪ್ರಶಸ್ತಿ: ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸುವ ಪತ್ರಕರ್ತರೊಬ್ಬರಿಗೆ ಅವರ ನೆನಪಿನಲ್ಲಿ 1993ರಿಂದ ಕರ್ನಾಟಕ ಸರ್ಕಾರ ಪ್ರತಿ ವರ್ಷ ‘ಟಿಯೆಸ್ಸಾರ್ ಪತ್ರಿಕೋದ್ಯಮ ಪ್ರಶಸ್ತಿ’ ನೀಡುತ್ತದೆ. ಈ ಪ್ರಶಸ್ತಿ ಮೊತ್ತ 2 ಲಕ್ಷ ರೂಪಾಯಿಗಳು ನಗದು ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿದೆ. 2018 ರವರೆಗೆ 26 ಜನ ಹಿರಿಯ ಪತ್ರಕರ್ತರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2019 ರಿಂದ 2023 ರವರೆಗಿನ 5 ವರ್ಷಗಳ ಅವಧಿಯ ಪ್ರಶಸ್ತಿಗಳನ್ನು ಇದೀಗ ಸರ್ಕಾರ ಪ್ರಕಟಿಸಿದೆ. 2019ನೇ ಸಾಲಿಗೆ ಶಿವಾಜಿ ಎಸ್ ಗಣೇಶನ್, 2020ನೇ ಸಾಲಿಗೆ ಶ್ರೀಕಾಂತಾಚಾರ್ಯ.ಆರ್.ಮಣೂರ, 2021ನೇ ಸಾಲಿಗೆ ಡಾ.ಆರ್.ಪೂರ್ಣಿಮಾ ಮತ್ತು 2022ನೇ ಸಾಲಿಗೆ ಡಾ.ಪದ್ಮರಾಜ ದಂಡಾವತಿ ಹಾಗೂ 2023ನೇ ಸಾಲಿಗೆ ಡಾ.ಸರಜೂ ಕಾಟ್ಕರ್ ಅವರಿಗೆ ಈ ಪುರಸ್ಕಾರ ನೀಡಲಾಗಿದೆ.


ಮೋಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ: ಕನ್ನಡ ಪತ್ರಿಕಾ ರಂಗದ ಭೀಷ್ಮ ಎಂದೇ ಹೆಸರಾದ ಮೊಹರೆ ಹಣಮಂತರಾಯರ ಅವರ ಹೆಸರಿನಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ. ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆಯನ್ನು ಗುರುತಿಸಿ ಇವರ ಸ್ಮರಣಾರ್ಥ ‘ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ’ಯನ್ನು ಕರ್ನಾಟಕ ಸರ್ಕಾರವು 2010ರಿಂದ ಪ್ರತಿ ವರ್ಷ ನೀಡುತ್ತಿದೆ. ಈ ಪ್ರಶಸ್ತಿಯು 2 ಲಕ್ಷ ರೂ. ನಗದು ಪುರಸ್ಕಾರವನ್ನು ಒಳಗೊಂಡಿದೆ. ಈ ವರೆಗೆ 09 ಪತ್ರಕರ್ತರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2019 ರಿಂದ 2023 ರವರೆಗಿನ 5 ವರ್ಷಗಳ ಅವಧಿಯ ಪ್ರಶಸ್ತಿಗಳನ್ನು ಇದೀಗ ಸರ್ಕಾರ ಪ್ರಕಟಿಸಿದೆ. 2019ನೇ ಸಾಲಿಗೆ ರಾಜೀವ್ ಕಿದಿಯೂರ, 2020ನೇ ಸಾಲಿಗೆ ಇಂದೂಧರ ಹೊನ್ನಾಪುರ, 2021ನೇ ಸಾಲಿಗೆ ಎನ್.ಮಂಜುನಾಥ, 2022ನೇ ಸಾಲಿಗೆ ಚಂದ್ರಶೇಖರ್ ಪಾಲೆತ್ತಾಡಿ, 2023ನೇ ಸಾಲಿಗೆ ಶಿವಲಿಂಗಪ್ಪ ದೊಡ್ಡಮನಿ ಅವರಿಗೆ ಪ್ರಶಸ್ತಿ ನೀಡಲಾಗಿದೆ.


ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅಧ್ಯಕ್ಷತೆಯ ರಚಿತವಾದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ.ಈಶ್ವರ ದೈತೋಟ, ಶಾಂತಲಾ ಧರ್ಮರಾಜ್, ಎಂ.ಎಸ್.ಮಣಿ ಹಾಗೂ ಸದಸ್ಯ ಕಾರ್ಯದರ್ಶಿಗಳಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ.ನಿAಬಾಳ್ಕರ್ ಅವರಿದ್ದರು. ಈ ಸಮಿತಿಯ ಶಿಫಾರಸ್ಸುಗಳನ್ನು ಸರಕಾರ ಅನುಮೋದಿಸಿ ಪ್ರಶಸ್ತಿ ಘೋಷಿಸಿದೆ. ಕೋವಿಡ್ ಸೇರಿ ನಾನಾ ಕಾರಣಗಳಿಂದ ವಿಳಂಬವಾಗಿದ್ದ 2019 ರಿಂದ 2023ನೇ ಸಾಲಿನ ಒಟ್ಟು 5 ವರ್ಷಗಳ ಅವಧಿಯ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಈ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೀಘ್ರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿAಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *