
ಹೊಸಪೇಟೆ ( ವಿಜಯನಗರ ): ಜೂನ್ ಮಾಹೆಯಲ್ಲಿ 27ರಂದು ನಿಗದಿಯಾದ ಶ್ರೀ ನಾಡಪ್ರಭು ಕೆಂಪೇಗೌಡರ ಜಯಂತಿಯ ಆಚರಣೆ ನಿಮಿತ್ತ ಜೂನ್ 24ರಂದು ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಅನುರಾಧ ಜಿ ಅವರು ಜಿಲ್ಲೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪೂರ್ವಭಾವಿ ಸಿದ್ಧತೆಗೆ ನಿರ್ದೇಶನ ನೀಡಿದರು.
ಈ ವೇಳೆ ಅವರು ಮಾತನಾಡಿ, ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪ್ರತಿ ತಾಲೂಕುಗಳಲ್ಲಿ ಯಾವುದೇ ಅಡಚಣೆ ಇಲ್ಲದೆ ಅಚ್ಚುಕಟ್ಟಾಗಿ ವೇದಿಕೆ ಕಾರ್ಯಕ್ರಮ, ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲು ಜಿಲ್ಲೆ ಎಲ್ಲಾ ತಾಲೂಕುಗಳ ತಹಸೀಲ್ದಾರರು ಕ್ರಮಕೈಗೊಳ್ಳಬೇಕು. ಜೊತೆಗೆ ಕಲಾತಂಡಗಳನ್ನು ಒದಗಿಸಲು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.
ಜಯಂತಿಯನ್ನು ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ ಆಚರಿಸಬೇಕು. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಸಂಘ ಸಂಸ್ಥೆಗಳ ಮುಖಂಡರು ಜಯಂತ್ಯುತ್ಸವದಲ್ಲಿ ಭಾಗವಹಿಸಬೇಕು ಎಂದು ಕೋರಿದರು.
ಎಲ್ಲಾ ಕಡೆಗಳಲ್ಲಿ ಜಯಂತಿಯನ್ನು ಆಚರಣೆ ಮಾಡಬೇಕು. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಡ್ಡಾಯ ಕೆಂಪೇಗೌಡರ ಜಯಂತಿಯನ್ನು ವಿಶೇಷವಾಗಿ ಆಚರಣೆ ಮಾಡಲು ಬಿಬಿಎಂಪಿಯಿಂದ 1 ಲಕ್ಷ ರೂ ಅನುದಾನ ಬಿಡುಗಡೆ ಆಗಲಿದೆ. ಅದರಂತೆ ಜಯಂತಿ ಆಚರಣೆಗೆ ಕ್ರಮವಹಿಸಬೇಕು ಎಂದು ಎಲ್ಲ ತಹಸೀಲ್ದಾರಗಳಿಗೆ ನಿರ್ದೇಶನ ನೀಡಿದರು.
ವಿಡಿಯೋ ಸಂವಾದದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೇಶ ರಂಗಣ್ಣನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.