
ಹೊಸಪೇಟೆ (ವಿಜಯನಗರ) : ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಎಸ್.ಸಿ., ಎಸ್.ಟಿ) ಕಲ್ಯಾಣ ಸಮಿತಿಯ ಸಭೆಗೆ ವಿಜಯನಗರ ಜಿಲ್ಲೆಯ ಅನುಷ್ಠಾನ ಇಲಾಖೆಗಳು ಎಸ್.ಸಿ., ಎಸ್.ಟಿ ಯೋಜನೆಗಳ ಪ್ರಗತಿ ವರದಿಯೊಂದಿಗೆ ಸ್ಪಷ್ಟವಾಗಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕ ವಿಧಾನಮಂಡಲದ ಎಸ್.ಸಿ., ಎಸ್ಟಿ ಕಲ್ಯಾಣ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 13ರಂದು ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ಇದೇ ಸೆಪ್ಟೆಂಬರ್ 19 ರಿಂದ 21ರ ವರೆಗೆ ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು, ಕಲಬುರಗಿ ವಿಭಾಗದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಅಭಿವೃದ್ಧಿ, ಕಲ್ಯಾಣ, ಏಳಿಗೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯು ಸೆ.21ರಂದು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಪ್ರಗತಿ ಪರಿಶೀಲನೆ ಜರುಗಲಿದೆ. ವಿಜಯನಗರ ಜಿಲ್ಲೆಗೆ ಸಂಬಂಧಿಸಿದಂತೆ ಎಲ್ಲ ಅನುಷ್ಠಾನ ಇಲಾಖೆಗಳಲ್ಲಿ ಸಾಮಾನ್ಯ ಕಾರ್ಯಕ್ರಮಗಳು ಮತ್ತು ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆಗಳ ಅಡಿಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಕಲ್ಯಾಣ ಕಾರ್ಯಕ್ರಮಗಳು, ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಹಲವು ಪ್ರಶ್ನಾವಳಿಗಳ ರಿತ್ಯ ಅಧಿಕಾರಿಗಳೊಂದಿಗೆ ಸಮಿತಿಯು ಚರ್ಚೆ ನಡೆಸಲಿದೆ ಎಂದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಅಭಿವೃದ್ಧಿ, ಕಲ್ಯಾಣ, ಏಳಿಗೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳವಾರು ಪ್ರಗತಿ ವರದಿಯನ್ನು ಸಂಬಂಧಪಟ್ಟ ಎಲ್ಲ ಇಲಾಖೆಗಳು ನಿಗದಿತ ಅವಧಿಯೊಳಗೆ ಸಲ್ಲಿಸಬೇಕು. ಇಲಾಖೆಗಳು ಸಲ್ಲಿಸಿದ ಮಾಹಿತಿಯುಳ್ಳ ಬುಕ್ ಲೆಟ್ ಸಿದ್ದಪಡಿಸಿ ಎಸ್.ಸಿ., ಎಸ್.ಟಿ ಕಲ್ಯಾಣ ಸಮಿತಿ ಪ್ರಗತಿ ಪರಿಶೀಲನಾ ಸಭೆಗೆ ಕಳುಹಿಸಿಕೊಡಲು ಮತ್ತು ಮಾಹಿತಿ ನೀಡದ ಇಲಾಖೆಗಳಿಗೆ ನೋಟೀಸ್ ಜಾರಿಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಸ್ಪಷ್ಟ ಮಾಹಿತಿ ನೀಡುವಲ್ಲಿ ನಿಮಗೆ ಸಮಸ್ಯೆಯಿದ್ದಲ್ಲಿ ಮೇಲಾಧಿಕಾರಿಗಳಿಂದ ಕೇಳಿ, ಸರಿಯಾದ ಮಾಹಿತಿಯನ್ನು ಕೂಡಲೇ ಒದಗಿಸಬೇಕು. ಈ ಹಿನ್ನೆಲೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಹೆಚ್.ಎಸ್. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.