
ಹೊಸಪೇಟೆ (ವಿಜಯನಗರ): ಹೊಸಪೇಟೆ ತಾಲೂಕು ಕಾನೂನು ಸೇವಾ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಕೀಲರ ಸಂಘ ಹೊಸಪೇಟೆ, ಜಿಲ್ಲಾ ಕಾರ್ಮಿಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಡಾನ್ ಬೋಸ್ಕೋ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜೂನ್ ೧೨ ರಂದು “ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ” ಕಾರ್ಯಕ್ರಮ ನಡೆಯಿತು.
ಈ ದಿನಾಚರಣೆಯ ಅಂಗವಾಗಿ ಬೆಳಗ್ಗೆ ಜನ ಜಾಗೃತಿ ಜಾಥಾ ನಡೆಯಿತು. ಹೊಸಪೇಟೆಯ ಸರ್ದಾರ್ ಪಟೇಲ್ ಸರ್ಕಾರಿ ಪ್ರೌಢಶಾಲೆಯಿಂದ ಆರಂಭವಾದ ಜಾಥಾ ನಗರದ ವಿವಿಧೆಡೆ ಸಂಚರಿಸಿ ಡಾನ್ ಬೋಸ್ಕೋ ಸಂಸ್ಥೆಗೆ ತಲುಪಿತು. ಜಾಥಾಕ್ಕೆ ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಹೇಮಲತಾ ಬಿ. ಹುಲ್ಲೂರ ಅವರು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಪ್ರತಿ ವರ್ಷ ಜೂನ್ ೧೨ ರಂದು ಭಾರತ ಸೇರಿದಂತೆ ವಿಶ್ವಾದ್ಯಂತ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಗುತ್ತಿದೆ. ಅದರಂತೆ ನಾವು ಜಾಗೃತರಾಗಿ ವಿಶ್ವದಾದ್ಯಂತ ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸಬೇಕು. ನಮ್ಮ ಮಕ್ಕಳು ನಮ್ಮ ಆಸ್ತಿಯಾಗಿದ್ದಾರೆ. ಅವರನ್ನು ದುಡಿಮೆಗೆ ಹಚ್ಚದೇ ಅವರಿಗೆ ಸರಿಯಾದ ವಿದ್ಯಾಭ್ಯಾಸ ನೀಡಬೇಕು ಎಂದು ತಿಳಿಸಿದರು.
ಈ ಮೊದಲು ಬಾಲ ಕಾರ್ಮಿಕರು ಕೃಷಿ ಚಟುವಟಿಕೆಯಲ್ಲಿ ಹೆಚ್ಚು ಕಾಣಸಿಗುತ್ತಿದ್ದರು. ಈಗ ಹೆಚ್ಚಾಗಿ ಗ್ಯಾರೇಜ್, ಹೊಟೆಲ್ಗಳಲ್ಲಿ ಕೆಲಸ ಮಾಡುವುದು ರೂಢಿಯಾಗುತ್ತಿದೆ. ಇದಕ್ಕೆ ಕಾರಣ ಬಡತನ ಇರಬಹುದು ಆದರೆ ಯಾವುದೇ ಮಗುವು ಶಿಕ್ಷಣದಿಂದ ವಂಚಿತವಾಗಬಾರದು. ಮಕ್ಕಳು ಸಂವಿಧಾನಬದ್ಧ ಮೂಲಭೂತ ಹಕ್ಕುಗಳಿಗೆ ಬದ್ಧರಾಗಿದ್ದಾರೆ. ಅವರಿಗೆ ಪ್ರತಿಯೊಂದು ಸೌಲಭ್ಯ ಸಿಗುವಂತಾಗಬೇಕು ಎಂದು ಸಲಹೆ ಮಾಡಿದರು.
ಗೌರವಾನ್ವಿತ ಅಪರ ಸಿವಿಲ್ ನ್ಯಾಯಾಧೀಶರಾದ ಅಶೋಕ್ ಹೆಚ್.ಆರ್. ಅವರು ಮಾತನಾಡಿ, ಮಕ್ಕಳು ಕಟ್ಟಡ ಕೆಲಸದಲ್ಲಿ, ಅಂಗಡಿಗಳಲ್ಲಿ, ಬೇಕರಿ, ದೊಡ್ಡ ದೊಡ್ಡ ಮನೆಗಳಲ್ಲಿ ಹಾಗೂ ಇನ್ನೀತರ ಸ್ಥಳಗಳಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಕೆಲಸದಾಳುಗಳಾಗಿದ್ದಾರೆ. ಇಂತಹ ಅನಿಷ್ಠ ಬಾಲ ಕಾರ್ಮಿಕ ಪದ್ಧತಿಯ ಪಿಡುಗನ್ನು ಹೋಗಲಾಡಿಸಬೇಕು ಎಂದು ಹೇಳಿದರು.
ಬಳಿಕ ಡಾನ್ ಬೋಸ್ಕೋ ಸಂಸ್ಥೆಯಲ್ಲಿ ನಡೆದ ವೇದಿಕೆಯ ಕಾರ್ಯಕ್ರಮಕ್ಕೆ ವಿಜಯನಗರ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರಮತ್ತ್ತೂರ ಅವರು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಬಾಲ ಕಾರ್ಮಿಕ ಪದ್ದತಿಯನ್ನು ಹೋಗಲಾಡಿಸುವುದು ಜೊತೆಗೆ ಅದರಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.

ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಪ್ರಶಾಂತ್ ನಾಗಲಾಪುರ, ಗೌರವಾನ್ವಿತ ೩ನೇ ಅಪರ ಸಿವಿಲ್ ನ್ಯಾಯಾಧೀಶರಾದ ಚೈತ್ರ. ಜೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ವೇತಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ್ ಉಂಕಿ, ಹೊಸಪೇಟೆ ವಕೀಲರ ಸಂಘದ ಅಧ್ಯಕ್ಷರಾದ ಕೆ.ಪ್ರಹ್ಲಾದ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಪಿ.ಶ್ರೀನಿವಾಸಮೂರ್ತಿ, ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಲಕನ್ ಆರ್.ಮಸುಗುಪ್ಪಿ, ಹೊಸಪೇಟೆ ಪೊಲೀಸ್ ಠಾಣೆಯ ಸಂಚಾರಿ ವಿಭಾಗದ ಪೊಲೀಸ್ ಇನ್ಸಪೆಕ್ಟರ್ ರವೀಂದ್ರ ವೈ.ವಿ., ಡಾನ್ ಬೋಸ್ಕೋ ಸಂಸ್ಥೆಯ ನಿರ್ದೇಶಕರಾದ ಪಾ.ರೋಷನ್, ಸಮಾಜ ಕಾರ್ಯ ವಿಭಾಗದ ನಿರ್ದೇಶಕರಾದ ಪಾ.ಪ್ರಾನ್ಸಿಸ್ ಉಪಸ್ಥಿತರಿದ್ದರು. ವಕೀಲರ ಸಂಘದ ಸದಸ್ಯರಾದ ಎ ಕರುಣಾನಿಧಿ ಅವರು ವಿಶೇಷ ಉಪನ್ಯಾಸ ನೀಡಿದರು.