ಹೊಸಪೇಟೆ (ವಿಜಯನಗರ) : ಜೂನ್ 17 ರಂದು ಬಕ್ರೀದ್ ಹಬ್ಬ ಮತ್ತು ಜೂನ್ 18 ರಂದು ಬಾಸಿಖುದ್ದಾ ಆಚರಣೆ ನಡೆಯಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಶಾಂತ ರೀತಿಯಿಂದ ಹಬ್ಬ ಆಚರಿಸುವ ಸಲುವಾಗಿ ಜೂನ್ 16ರಂದು ಬೆಳಿಗ್ಗೆ 6 ಗಂಟೆಯಿAದ ಜೂನ್ 18ರ ರಾತ್ರಿ 10 ಗಂಟೆಯವರೆಗೆ ವಿಜಯನಗರ ಜಿಲ್ಲೆಯ ಹೊಸಪೇಟೆ, ಹರಪನಹಳ್ಳಿ, ಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ಕೊಟ್ಟೂರು ತಾಲೂಕು ವ್ಯಾಪ್ತಿಯಲ್ಲಿನ ಮದ್ಯದಂಗಡಿ, ಬಾರ್, ರೆಸ್ಟೋರೆಂಟ್ ಮತ್ತು ಇತರೆ ಸ್ಥಳಗಳಲ್ಲಿ ಮದ್ಯ ಮಾರಾಟ ಮಾಡದಂತೆ ಹಾಗೂ ಮದ್ಯದಂಗಡಿಗಳನ್ನು ಮುಚ್ಚುವಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.
ವಿಜಯನಗರ ಜಿಲ್ಲಾದ್ಯಂತ ಜೂನ್ 17ರಂದು ಬಕ್ರಿದ್ ಹಬ್ಬ ಮತ್ತು ಜೂನ್ 18ರಂದು ಬಾಸಿಖುದ್ದಾ ಆಚರಣೆ ನಡೆಯಲಿದ್ದು, ಜಿಲ್ಲೆಯ ಮುಸ್ಲಿಂ ಸಮುದಾಯವರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸುವ ಮೂಲಕ ಬಕ್ರಿದ್ ಹಬ್ಬ ಆಚರಣೆ ಮಾಡುತ್ತಾರೆ.
ಈ ಸಮಯದಲ್ಲಿ ಸಾರ್ವಜನಿಕರು ಮದ್ಯದ ಅಂಗಡಿಗಳಲ್ಲಿ ಮದ್ಯ ಸೇವನೆ ಮಾಡಿ ಮದ್ಯದ ಅಮಲಿನಲ್ಲಿ ಗಲಾಟೆಗಳು ಆಗುವ ಸಂಭವ ಇರುವ ಕಾರಣದಿಂದಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದಾಗಿ ಕರ್ನಾಟಕ ಅಬಕಾರಿ ಕಾಯಿದೆ 1965ರ ಕಲಂ 21ರ ಪ್ರಕಾರ ಪ್ರದತ್ತವಾದ ಅಧಿಕಾರ ಚಲಾಯಿಸಿ ಮದ್ಯ ಮಾರಾಟ ಮಾಡದಂತೆ ಹಾಗೂ ಮದ್ಯದಂಗಡಿಗಳನ್ನು ಮುಚ್ಚುವಂತೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.