
ಹೊಸಪೇಟೆ (ವಿಜಯನಗರ) : ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಆಡಿಟೋರಿಂ ಹಾಲ್ನಲ್ಲಿ ಜೂನ್ 21ರಂದು ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳನ್ನು ಎಂದಿಗೂ ನಿಲ್ಲಿಸುವುದಿಲ್ಲ, ನಿರಂತರ ಮುಂದುವರೆಯಲಿವೆ. ಈ ಬಗ್ಗೆ ಅಧಿಕಾರಿಗಳಲ್ಲಿ ಯಾವುದೇ ರೀತಿಯ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು, ಆಯಾ ಯೋಜನೆಗಳ ಅನುಷ್ಠಾನಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿ ಜನರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಸೂಚಿಸಿದರು.
2007-08ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ 7512 ದೇವದಾಸಿ ಮಹಿಳೆಯರಿದ್ದಾರೆ ಎಂದು ಗುರುತಿಸಲಾಗಿದೆ ಎನ್ನುವ ವರದಿ ಇದೆ. ಈ ಪದ್ಧತಿ ಜಿಲ್ಲೆಯಲ್ಲಿ ಸಂಪೂರ್ಣ ತೊಲಗಬೇಕು ಎಂದು ತಿಳಿಸಿದ ಮುಖ್ಯಮಂತ್ರಿಗಳು, ಇದುವರೆಗೆ ವಸತಿ ಸೌಲಭ್ಯದಿಂದ ವಂಚಿತರಾದ 4680 ಮಾಜಿ ದೇವದಾಸಿ ಮಹಿಳೆಯರಿಗೆ ಕೂಡಲೇ ವಸತಿ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು. ದೇವದಾಸಿಯರಿಗೆ ವಸತಿ ಸೌಕರ್ಯ ಕಲ್ಪಿಸುವ ಸಂಬAಧ ಅಗತ್ಯ ಕ್ರಮ ವಹಿಸಲು ಇದೆ ವೇಳೆ ವಸತಿ ಸಚಿವರಾದ ಜಮೀರ್ ಅಹಮದ್ ಖಾನ್ ಅವರಿಗೆ ತಿಳಿಸಿದರು.
ಹಾಸ್ಟೇಲ್ಗಳ ಸ್ಥಿತಿಗತಿಯ ಬಗ್ಗೆ ಮುಖ್ಯಮಂತ್ರಿಗಳು ಸಭೆಯಲ್ಲಿ ಪರಿಶೀಲಿಸಿದರು. ಹಾಸ್ಟೆಲ್ಗಳಿಗೆ ನಿಯಮಿತವಾಗಿ ಭೇಟಿ ನೀಡುತ್ತೀರಾ? ಅಲ್ಲಿ ಊಟ ಮಾಡಿ ಗುಣಮಟ್ಟದ ಪರಿಶೀಲಿಸಿದ್ದೀರಾ? ಹಾಸ್ಟೇಲ್ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕಡಿಮೆಯಾಗಲು ಕಾರಣ ಏನು? ಎಂದು ಮುಖ್ಯಮಂತ್ರಿಗಳು ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಪ್ರಶ್ನಿಸಿದರು. ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಂಡು ಮಕ್ಕಳಿಗೆ ಉತ್ತಮವಾದ ಸೌಕರ್ಯ ಒದಗಿಸಲು ಮುಖ್ಯಮಂತ್ರಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಬೇಕು. ಪ್ರತಿ ಮನೆಗೆ ಭೇಟಿ ನೀಡಿ ಕುಂದುಕೊರತೆಗಳನ್ನು ಆಲಿಸಬೇಕು. ಗ್ರಾಮದಲ್ಲಿ ಸುತ್ತಾಡದೇ, ಮನೆಗಳಿಗೆ ಭೇಟಿ ನೀಡದೇ ಗ್ರಾಮ ಸ್ವಚ್ಛವಾಗಿದೆ. ಶೌಚಮುಕ್ತ ಗ್ರಾಮ ಎಂದು ಇನ್ಮುಂದೆ ತಪ್ಪು ವರದಿ ನೀಡುವುದು ಮುರುಕಳಿಸಿದರೇ ಅಂತಹ ಪಿಡಿಓಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.
ಜಾನುವಾರು ಜೀವಹಾನಿ ಎಷ್ಟು ಪ್ರಕರಣಗಳಿಗೆ ಪರಿಹಾರ ನೀಡಿದ್ದೀರಿ ಎಂದು ಮುಖ್ಯಮಂತ್ರಿಗಳು ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ಪ್ರಶ್ನಿಸಿದರು. 2023-24ನೇ ಸಾಲಿನಲ್ಲಿ ಆಕಸ್ಮಿಕವಾಗಿ ಮರಣ ಹೊಂದಿದ 1389 ಕುರಿ ಮೇಕೆಗಳಿಗೆ 69,30,000 ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿನ ಒಟ್ಟು 3,38,560 ದನ ಮತ್ತು ಎಮ್ಮೆಗಳಿಗೆ ಹಾಗೂ 8,25,787 ಕುರಿ ಮೇಕೆಗಳಿಗೆ ಸದ್ಯ ಜಿಲ್ಲೆಯಲ್ಲಿ 1,89,024 ಮೆಟ್ರಿಕ್ ಟನ್ ಮೇವು ಲಭ್ಯವಿದೆ ಎಂದು ಪಶುಪಾಲನಾ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ದನ, ಎಮ್ಮೆ, ಎತ್ತು, ಕುರಿ, ಮೇಕೆಗಳು ಮೃತಪಟ್ಟಲ್ಲಿ ತಕ್ಷಣ ಪರಿಹಾರ ನೀಡಲು ಕ್ರಮ ವಹಿಸಬೇಕು ಎಂದು ಇದೆ ವೇಳೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.
ಸಹಾಯಕ ಆಯುಕ್ತರಿಗೆ ಸೂಚನೆ: ಸಹಾಯಕ ಆಯುಕ್ತರು ಇನ್ಮುಂದೆ ನಿಯಮಿತವಾಗಿ ಎಲ್ಲ ತಹಸೀಲ್ದಾರ ಕಚೇರಿಗಳಿಗೆ ಭೇಟಿ ನೀಡಬೇಕು. ಸರ್ವೇ ಅರ್ಜಿ, ಮೂಟೇಶನ್, ಖಾತಾ ಬದಲಾವಣೆ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಪರಿಶೀಲಿಸಿ ಆ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿ ಕೆಲಸದಲ್ಲಿ ವೇಗ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳು ಸಹಾಯಕ ಆಯುಕ್ತರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.